ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ(65) ಅವರು ಅ.16 ರಂದು ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ದಾಮೋದರ ಮಂಡೆಚ್ಚ ಮತ್ತು ಹರಿನಾರಾಯಣ ಬೈಪಡಿತ್ತಾಯರ ಶಿಷ್ಯರಾಗಿ ಭಾಗವತಿಕೆ ಮತ್ತು ಹಿಮ್ಮೇಳವಾದನ ಅಭ್ಯಾಸ ಮಾಡಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು.
ಆ ಕಾಲದ ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ 21 ವರ್ಷ ಗಳ ಕಾಲ ದೀರ್ಘ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು.
ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು.
ಕದ್ರಿ, ಎಡನೀರು, ಕುಂಟಾರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.
ಎಡನೀರು ಮಠದ ಪರಮ ಭಕ್ತರಾಗಿದ್ದ ಅಮ್ಮಣ್ಣಾಯರು ಅಲ್ಲಿ ನಡೆಯುವ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಗಾಯನ ಸೇವೆ ಸಲ್ಲಿಸುತ್ತಿದ್ದರು. ನೂರಾರು ಸಮ್ಮಾನಗಳಿಗೆ ಭಾಜನರಾಗಿದ್ದರು.
ಮೃತರು ಪತ್ನಿ, ಪುತ್ರಿಯರಿಬ್ಬರನ್ನು ಅಗಲಿದ್ದಾರೆ.




























