ಬಂಟ್ವಾಳ: ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 26, 2026ರಂದು ರಾತ್ರಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಪ್ರದೇಶದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು.
ಅಲ್ಲಿ KA-13-B-8178 ನೋಂದಣಿಯ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಿಸುತ್ತಿರುವುದು ಪತ್ತೆಯಾಯಿತು.
ವಾಹನದಲ್ಲಿದ್ದ ಮಂಡ್ಯ ಜಿಲ್ಲೆಯ ನಿವಾಸಿಗಳಾದ ಚಾಲಕ ನವೀನ ಮತ್ತು ಚೇತನ್ ಅವರನ್ನು ವಿಚಾರಿಸಿದಾಗ, ಚನ್ನರಾಯಪಟ್ಟಣದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಶಾಫಿ ಅವರಿಗೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಳುಹಿಸಿರುವುದು ತಿಳಿದುಬಂದಿದೆ. ಜಾನುವಾರು ಸಾಗಾಟಕ್ಕೆ ಇತರರ ಹೆಸರಿನಲ್ಲಿ ದಾಖಲಾತಿಗಳನ್ನು ಪಡೆದಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 51/2026ರಂತೆ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಪ್ರಿವೆನ್ಷನ್ ಆಫ್ ಸ್ಲಾಟರ್ ಅಂಡ್ ಪ್ರಿಸರ್ವೇಷನ್ ಆಫ್ ಕ್ಯಾಟಲ್ ಆಕ್ಟ್-2020ರ ಕಲಂ 4, 7, 12, ಪ್ರಿವೆನ್ಷನ್ ಆಫ್ ಕ್ರೂರ್ಟಿ ಟು ಅನಿಮಲ್ಸ್ ಆಕ್ಟ್-1960ರ ಕಲಂ 4, 11 ಹಾಗೂ ಇಂಡಿಯನ್ ಮೋಟಾರ್ ವಾಹನಗಳ ಕಾಯ್ದೆ-1988ರ ಕಲಂ 192(A)ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


























