ಬೆಳ್ಳಾರೆ: 24.03.2022 ರಂದು ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
ಮನೆಗಳ್ಳತನ ಪ್ರಕರಣ (ಕ್ರೈಂ ನಂ: 22/2022) ಸಂಬಂಧ ಐಪಿಸಿ ಕಲಂ 457 ಮತ್ತು 380 ಅಡಿಯಲ್ಲಿ ಆರೋಪಿಯಾಗಿದ್ದ ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ ಬೆಳ್ಳಾರೆ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣವನ್ನು ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್ ಅವರು ಆರೋಪಿಗೆ ಐಪಿಸಿ ಕಲಂ 457 ಅಡಿಯಲ್ಲಿ 6 ತಿಂಗಳ ಸಾದಾರಣ ಜೈಲು ಶಿಕ್ಷೆ ಹಾಗೂ 500 ರೂ. ದಂಡ, ಐಪಿಸಿ ಕಲಂ 380 ಅಡಿಯಲ್ಲಿ 10 ತಿಂಗಳ ಸಾದಾರಣ ಜೈಲು ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 10 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣದ ತನಿಖಾಧಿಕಾರಿಯಾಗಿ ಪಿ.ಎಸ್.ಐ ಸಂತೋಷ್ ಬಿ.ಪಿ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ.ಸಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿದರು.
ಇದೇ ವೇಳೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 269 ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ನ್ಯಾಯಾಲಯವು 1000 ರೂ. ದಂಡ ಅಥವಾ 10 ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

























