ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ನಡೆಸಿದ್ದ ಅನಿವಾಸಿಗಳನ್ನು ಗಡಿಪಾರು ಮಾಡಲು ಕುವೈತ್ ಸರ್ಕಾರ ಮುಂದಾಗಿದೆ. ಕುವೈತ್ ಸರ್ಕಾರದ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಶುಕ್ರವಾರ ದೇಶಾದ್ಯಂತ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ವಿಶ್ವದ ಹಲವೆಡೆಯೂ ಪ್ರತಿಭಟನೆ ನಡೆದಿದ್ದು, ಕುವೈತ್ನಲ್ಲಿ ಪ್ರತಿಭಟನೆ ನಡೆಸಿದ ಅನಿವಾಸಿಗಳನ್ನು ಬಂಧಿಸುವಂತೆ ಕುವೈತ್ ಸರ್ಕಾರ ಆದೇಶಿಸಿದೆ.
ಕುವೈತ್ನಲ್ಲಿರುವ ಎಲ್ಲಾ ಅನಿವಾಸಿಗಳು ಕುವೈತ್ ಕಾನೂನುಗಳನ್ನು ಗೌರವಿಸಬೇಕು. ಯಾವುದೇ ಅನಿವಾಸಿಗಳು ಕುವೈತ್ನಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂಬ ಕಾನೂನಿದೆ. ಆದರೆ ಇದನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಗಡಿಪಾರು ಮಾಡಲಾಗುತ್ತದೆ ಎಂಬ ವಿಚಾರ ಮೂಲಗಳ ಪ್ರಕಾರ ತಿಳಿದುಬಂದಿದೆ. ಅಲ್ಲದೇ ಗಡಿಪಾರು ಮಾಡಿದವರು ಮತ್ತೆ ಕುವೈತ್ ದೇಶವನ್ನು ಪ್ರವೇಶಿಸುವಂತಿಲ್ಲ ಎಂದು ಹೇಳಲಾಗುತ್ತಿದೆ.
ಈಗಾಗಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಲವರನ್ನು ಅಧಿಕಾರಿಗಳು ಗುರುತಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿಯೇ ಪ್ರತಿಭಟನೆ ನಡೆಸಿದವರ ವೀಸಾವನ್ನು ರದ್ದುಗೊಳಿಸಲಾಗುವುದು ಮತ್ತು ಅವರ ದೇಶಗಳಿಗೆ ಗಡಿಪಾರು ಮಾಡಲಾಗುವುದು. ಜೊತೆಗೆ ಕುವೈತ್ ನಾಗರಿಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ ಎಂದು ವರದಿಯಾಗಿದೆ.
ಇದೀಗ ಭಾರತದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಮುಸ್ಲಿಮರನ್ನು ಭಾರತದಿಂದ ಗಡಿಪಾರು ಏಕೆ ಮಾಡಬಾರದು ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಧನಿ ಎತ್ತಿದ್ದಾರೆ. ಕಳೆದರೆಡು ದಿನಗಳಿಂದ ಭಾರತದಲ್ಲಿ ಪ್ರತಿಭಟನೆ ಹೆಸರಲ್ಲಿ ಅನೇಕ ಮಂದಿ ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರ ಕೃತ್ಯ ಎಸಗಿದ್ದಾರೆ. ಇದರಿಂದ ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿದ ಕಿಡಿಗೇಡಿಗಳನ್ನು ಭಾರತದಿಂದ ಗಡಿಪಾರು ಮಾಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಈ ಪ್ರತಿಭಟನೆ, ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಬಂದಿದೆ. ಇವರನ್ನು ಬಂಧಿಸಿ ತನಿಖೆ ನಡೆಸಿ ದೇಶದಿಂದ ಗಡೀಪಾರು ಮಾಡಬೇಕೆಂದು ಜನ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದಾರೆ.


























