ಬೆಂಗಳೂರು: ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿಯನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರವರು ಸ್ವಾಗತಿಸಿದರು.

ನಂತರ ಯಲಹಂಕ ವೈಮಾನಿಕ ವಾಯುನೆಲೆಯಿಂದ ನೇರವಾಗಿ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳಿದ ಅವರು ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಮಾಡಿದರು. ನಂತರ ಬಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಳಿಕ, ಮಧ್ಯಾಹ್ನ 1.45ಕ್ಕೆ ಜ್ಞಾನಭಾರತಿ, ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಕಎಕನಾಮಿಕ್ಸ್ (ಬೇಸ್) ವಿವಿ ಕ್ಯಾಂಪಸ್ ಉದ್ಘಾಟನೆ, ಮೇಲ್ದರ್ಜೆಗೇರಿಸಿದ 150 ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 2.45ಕ್ಕೆ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ. ಸಬ್ರ್ಬನ್ ರೈಲ್ವೆ ಮಾರ್ಗ ನಿರ್ಮಾಣ ಸೇರಿ ವಿವಿಧ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.
ಮೈಸೂರಿನಲ್ಲಿ ನಾಳೆ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದು ಪ್ರಧಾನಿ ಮೋದಿ ಅವರ ಭೇಟಿಯ ಮುಖ್ಯ ಉದ್ದೇಶವಾಗಿದ್ದು, ಅದರೊಂದಿಗೆ ಅಭಿವೃದ್ಧಿ ಪಥವನ್ನು ಜೋಡಿಸಿ ಬೆಂಗಳೂರು ಬ್ರಾಂಡ್ಗೆ ಹೊಸ ಹೊಳಪು ನೀಡಲು ರಾಜ್ಯ ನಾಯಕತ್ವ ಮುಂದಾಗಿದೆ. ಬಹುಸಾವಿರ ಕೋಟಿ ರೂ.ಗಳ ಮೊತ್ತದ ಯೋಜನೆಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆಗಳೆಲ್ಲ ಬೆಂಗಳೂರು ಕೇಂದ್ರಿತವಾಗಿದೆ.
ದೆಹಲಿಯಿಂದ ಹೊರಡುವ ವೇಳೆ ಕನ್ನಡ ಭಾಷೆಯಲ್ಲಿ “ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ” ಎಂದು ಟ್ವಿಟ್ ಮಾಡಿದ್ದರು.