ಮಂಗಳೂರು: ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ರಾಷ್ಟ್ರಧ್ವಜ ಮಾರಾಟಕ್ಕೆ ಆ. 6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ ,ರಾಯಿ ಗ್ರಾಮ ಪಂಚಾಯತ್ ಸದಸ್ಯರು ತಯಾರಿಸಿದ ರಾಷ್ಟ್ರ ಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.

ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

























