ಬೆಂಗಳೂರು: ಪರಿಶಿಷ್ಟ ಜಾತಿ (Scheduled Castes – SC) ಮತ್ತು ಪರಿಶಿಷ್ಟ ಪಂಗಡಕ್ಕೆ (Scheduled Tribes – ST) ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಅನುಷ್ಠಾನ ಸಾಧ್ಯತೆಯ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿದ ನಂತರ ಈ ತೀರ್ಮಾನ ಘೋಷಿಸಿದರು.
ಅದರಂತೆ ಎಸ್ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15ರಿಂದ ಶೇ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಪ್ರಕಟವಾಗಲಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಳಮೀಸಲಾತಿ ನೀಡಬೇಕಿದೆ. ಈ ಬಗ್ಗೆಯೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇತರ ಹಿಂದುಳಿದ ವರ್ಗದವರ ಬಗ್ಗೆಯೂ ವರದಿಗಳು ಬಂದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಸರ್ವಪಕ್ಷ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನವು ಪ್ರಸ್ತಾಪಿಸಿದೆ. ಅದರ ಆಶಯದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬುದು ನಮ್ಮ ನಿರ್ಧಾರ. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಸಮಿತಿ ಅಧ್ಯಯನ ಮಾಡಿ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸರ್ವಪಕ್ಷ ಸಭೆಯಲ್ಲಿ ವರದಿ ಅನುಷ್ಠಾನ ಸಂಬಂಧ ಚರ್ಚೆ ನಡೆಸಿದೆವು ಎಂದು ತಿಳಿಸಿದರು. ಸರ್ವಪಕ್ಷ ಸಭೆಯ ನಿರ್ಣಯವನ್ನು ನಾಳೆಯೇ (ಅ 8) ಸಂಪುಟದಲ್ಲಿ ಇರಿಸಿ ಅಂಗೀಕಾರ ತೆಗೆದುಕೊಳ್ಳುತ್ತೇವೆ. ಬಹಳ ವರ್ಷಗಳ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಮೀಸಲಾತಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸ್ವಾಮೀಜಿ ಸಹ ಹೋರಾಟ ನಡೆಸಿದ್ದರು. ಶ್ರೀರಾಮುಲು, ರಾಜುಗೌಡ, ರಮೇಶ್ ಜಾರಕಿಹೊಳಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದರು. ಹಿಂದೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚನೆಯಾಗಿತ್ತು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ಅನುಮೋದನೆ ಕೊಟ್ಟರು. ಸಮಿತಿಯು 7 ನ್ಯಾಯಸಮ್ಮತ ಶಿಫಾರಸನ್ನು ಸರ್ಕಾರಕ್ಕೆ ಕೊಟ್ಟಿದೆ ಎಂದು ಸಿಎಂ ತಿಳಿಸಿದರು.


























