ಸುಳ್ಯ: ಕಳೆದ ಎರಡೂವರೆ ದಶಕಗಳಿಂದ ಸುಳ್ಯದಲ್ಲಿ ಸೋಲಿಲ್ಲದ ಸರದಾರನಂತೆ ಜಯಗಳಿಸಿದ್ದ ಹಾಲಿ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಇಂದು ಖಾಸಗಿ ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ.
ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

























