ಬೆಳಗಾವಿ : ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್ಪಿ (ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಹೇಳಿದರು.
ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.




























