ಬೆಂಗಳೂರು : ರಾಜ್ಯಾದ್ಯಂತ ಕೋವಿಡ್ ವೈರಸ್ಗೆ ತುತ್ತಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೋವಿಡ್-19 ಪರಿಸ್ಥಿತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಇಂದು ಉನ್ನತಮಟ್ಟದ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಉನ್ನತಮಟ್ಟದ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಮೂವರು ರಾಜ್ಯದಲ್ಲಿ ನಿಧನರಾಗಿದ್ದಾರೆ. ಆ ಮೂವರಿಗೂ ರಕ್ತದೊತ್ತಡ, ಶುಗರ್, ಉಸಿರಾಟದ ತೊಂದರೆ ಇತ್ತು. ಹಾಗಾಗಿ ಕೋವಿಡ್ನಿಂದಲೇ ಸತ್ತಿದ್ದಾರೆ ಅಂತಾ ಹೇಳಲು ಸಾಧ್ಯವಿಲ್ಲ. ಬೇರೆ, ಬೇರೆ ಕಾಯಿಲೆಯಿಂದ ಸತ್ತಿರಬಹುದು ಎಂದರು.
ಕೋವಿಡ್ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು. ಜನಸಂದಣಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರೆಲ್ಲ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಇದೇ ವೇಳೆ ಹೊಸ ವರ್ಷಾಚರಣೆ, ಕ್ರಿಸ್ ಮಸ್ಗೆ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಇಲ್ಲ. ಆದರೂ ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು, ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎನ್ನುವ ಸ್ಪಷ್ಟ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಕೋವಿಡ್ ಉಪತಳಿ JN.1 ಇದು ಅಪಾಯಕಾರಿಯಲ್ಲ. ರಾಜ್ಯ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ. ಪರಿಸ್ಥಿತಿ ನೋಡಿಕೊಂಡು ಡೆಡಿಕೇಡೆಡ್ ಆಸ್ಪತ್ರೆಗಳನ್ನು ನಿಗಧಿ ಮಾಡುತ್ತೇವೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆಯನ್ನು ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರು ನೀಡಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ಏನೇನು ಸಲಹೆ ನೀಡುತ್ತೋ ಅದನ್ನ ಸರ್ಕಾರ ಅನುಸರಿಸುತ್ತೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಗಳನ್ನ ಅನುಸರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


























