ರಾಯಚೂರು : ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದ್ದು, ರಸ್ತೆ ಸಂಚಾರ ಬಂದ್ ಮಾಡಿ, ಟೈಯರ್ಗೆ ಬೆಂಕಿ ಹಚ್ಚಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ನಲ್ಲಿನ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ.
ಈ ಹಿನ್ನೆಲೆ ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.
ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರಿ ವೇಳೆ ಚಪ್ಪಲಿ ಹಾರ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನು ಬೆಳಗ್ಗೆ ನೋಡಿದ ಸಮುದಾಯದ ಮುಖಂಡರು ಆಕ್ರೋಶಗೊಂಡಿದ್ದರು. ಇದರಿಂದ ದೊಡ್ಡ ಪ್ರಮಾಣದಲ್ಲಿ ಸೇರಿರುವ ಸಮಾಜದವರು ಪ್ರತಿಭಟನೆ ಮಾಡುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಖಂಡರ ಜೊತೆ ಚರ್ಚೆ ಮಾಡಿ ಮನವೋಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಪ್ರತಿಭಟನೆ ಕೊಂಚ ಕಡಿಮೆಯಾಗಿದೆ ಎಂದು ವರದಿಯಾಗಿದೆ.


























