ಮಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಇತರ ಹಲವು ಕಡೆಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಳೆಯ ಸಿಂಚನವಾಯಿತು.
ಮಂಗಳೂರು ನಗರದ ಕೆಲವೆಡೆ ಸಾಧಾರಣ ಮಳೆಯಾಗಿದೆ. ವರ್ಷದ ಮೊದಲ ಮಳೆ ಸುರಿದಿದ್ದು, ಬಿಸಿಲ ಬೇಗೆಗೆ ಕಾದಿದ್ದ ನೆಲಕ್ಕೆ ತುಸು ತಂಪೆರೆಯಿತು.
ಮಂಗಳೂರು ನಗರ ಕೂಡ ಈ ವರ್ಷ ನೀರಿನ ಸಮಸ್ಯೆ ಎದುರಿಸುತ್ತಿದೆ. ನಗರಕ್ಕೆ ನೀರು ಪೂರೈಕೆಯ ಪ್ರಮುಖ ಮೂಲವಾಗಿರುವ ನೇತ್ರಾವತಿ ನದಿಯಲ್ಲಿ ಬೇಸಗೆಗೂ ಮುನ್ನವೇ ನೀರು ಕಡಿಮೆಯಾಗಿದೆ.
ಮತ್ತೊಂದೆಡೆ, ನೆರೆಯ ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕೂಡ ಶುಕ್ರವಾರ ಮಳೆಯಾಗಿದೆ. ಕಾಸರಗೋಡು ನಗರದಲ್ಲಿ ಕೂಡ ಮಳೆಯಾಗಿದೆ. ಉಳಿದಂತೆ, ಜಿಲ್ಲೆಯ ಮದೂರು, ಕುಂಬ್ಳೆ ಸೇರಿ ಹಲವೆಡೆ ವರುಣನ ಸಿಂಚನವಾಯಿತು.
ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಇಂದಿನಿಂದ ಮೂರು ದಿನ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 4 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

























