ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ.
764132 ಮತಗಳ ಮೂಲಕ ಚೌಟ ಜಯಗಳಿಸಿದ್ದಾರೆ. 149208 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.

ಕ್ಯಾಪ್ಟನ್ ಬ್ರಿಜೇಶ್ ಚೌಟರ ಬಗ್ಗೆ..:
ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ.
ಬ್ರಿಜೇಶ್ ಚೌಟರು ಕಾಲೇಜು ದಿನಗಳಲ್ಲಿಯೇ ಎನ್.ಸಿ.ಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.
ಪದವಿಯಲ್ಲಿದ್ದಾಗ ಎನ್ ಸಿಸಿಯಲ್ಲಿ ಮಂಗಳೂರು ವಿವಿಯಲ್ಲಿ ಬೆಸ್ಟ್ ಕೇಡೆಟ್ ಎಂದು ಗುರುತಿಸಿದ್ದಲ್ಲದೆ, ದೆಹಲಿ ರಿಪಬ್ಲಿಕ್ ಪೆರೇಡ್ ನಲ್ಲಿ ಎನ್ಸಿಸಿ ಕೇಡೆಟ್ ಆಗಿ ಪಾಲ್ಗೊಂಡಿದ್ದರು.
ಯುಪಿಎಸ್ಸಿ ಆಯೋಜಿಸುವ ಕಂಬೈನ್ಸ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ (CDSE) ಪರೀಕ್ಷೆ ಹಾಗೂ ಎಸ್ಎಸ್ಬಿ ಇಂಟರ್ವ್ಯೂ ನಲ್ಲಿ ತೇರ್ಗಡೆಗೊಂಡು ಚೆನ್ನೈ ಯಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ ತರಬೇತಿ ಪಡೆದು ಭಾರತೀಯ ಭೂ ಸೇನೆಯ ಪ್ರತಿಷ್ಠಿತ 8 ಗೋರ್ಖಾ ರೈಫಲ್ಸ್ ನ 7ನೇ ಬಾಟಲಿಯನ್ ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬ್ರಿಜೇಶ್ ಚೌಟ ಆರ್.ಎಸ್.ಎಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.
2013ರಲ್ಲಿ ಯುವಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2016- 19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಕ್ಯಾಪ್ಟನ್, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.
2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿದ್ದರು. ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ ಮಂಗಳೂರು ಕಂಬಳ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ.
ಮಂಗಳೂರು ಲಿಟ್ ಫೆಸ್ಟ್ ಆಯೋಜಕರಾಗಿ, ಸಮರ್ಥನ್ ಫೌಂಡೇಶನ್ ಟ್ರಸ್ಟಿಯಾಗಿ ಹೀಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಬ್ರಿಜೇಶ್ ಚೌಟ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ಚೌಟ ಅವರು ಪ್ರಸ್ತುತ ಬಿಜೆಪಿಯ ಕರ್ನಾಟಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿದ್ದು, ತಳಮಟ್ಟದ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ದಕ್ಷಿಣ ಜಿಲ್ಲಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

























