ಉಡುಪಿ : ದೇವಲೋಕದಲ್ಲಿ ವ್ಯವಹರಿಸುವುದು ಸಂಸ್ಕೃತ ಭಾಷೆಯಲ್ಲಿ ಮಾತ್ರ. ಸಂಸ್ಕೃತ ದೇವ ಭಾಷೆ. ಸಂಸ್ಕೃತ ಭಾಷೆ ತಿಳಿಯದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲ್ಲ. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಲೇಬೇಕು. ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಈ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜನ್ಮಾಷ್ಟಮಿ ಸಮಾರೋಪ ಕಾರ್ಯಕ್ರಮ ನಡೀತು. ಈ ವೇಳೆ ಸಂಸ್ಕೃತ ಭಾಷೆಯಲ್ಲಿ ಮಾತನಾಡಿರುವ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು. ಸಂಸ್ಕೃತ ವಿಶ್ವಭಾಷೆ, ಪವಿತ್ರ.. ಶ್ರೇಷ್ಠ.. ಪಾವನ ಎಂದರು.
ಒಂದು ತಿಂಗಳುಗಳ ಕಾಲ ನಡೆದ ಶ್ರೀ ಕೃಷ್ಣ ಮಹಾಸ್ವೋತ್ಸವವನ್ನು ದೇವರಿಗೆ ಅರ್ಪಣೆ ಮಾಡಿದ್ದೇವೆ. ಸಂಸ್ಕೃತ ಒಂದು ವಿಶ್ವ ಭಾಷೆ, ದೇವ ಭಾಷೆ. ದೇವರ ಕಾರ್ಯಕ್ರಮದಲ್ಲಿ ದೇವ ಭಾಷೆಯನ್ನೇ ಬಳಸುತ್ತೇವೆ. ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ.
ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ. ಪಿತಾದಿಂದ ಫಾದರ್.. ಮಾತಾದಿಂದ ಮದರ್ ಹುಟ್ಟಿಕೊಂಡಿದೆ. ಸಮಗ್ರವೂ ಸಂಸ್ಕೃತ ಭಾಷೆಯಿಂದ ಹುಟ್ಟಿಕೊಂಡಿದೆ. ಸಂಸ್ಕೃತ ಭಾಷೆಯನ್ನು ಹೊರತುಪಡಿಸಿ ಇತರ ಭಾಷೆಗಳು ಪ್ರಾದೇಶಿಕ ಭಾಷೆಗಳಾಗಿವೆ. ಕರ್ನಾಟಕದಲ್ಲಿ ಕನ್ನಡ, ದೇಶದಲ್ಲಿ ಹಿಂದಿ, ವಿದೇಶದಲ್ಲಿ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯು ಸಂಸ್ಕೃತ ಭಾಷಾ ಅಂತರ್ಲೋಕೀಯ ಭಾಷೆಯಾಗಿದೆ ಎಂದು ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಶ್ರೀಕೃಷ್ಣನ ಮಹೋತ್ಸವದ ಸಂದರ್ಭದಲ್ಲಿ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾಡಿರುವ ಈ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಸ್ವಾಮೀಜಿಯ ಹೇಳಿಕೆಗೆ ವಿರೋಧವೂ ವ್ಯಕ್ತವಾಗುತ್ತಿದೆ.



























