ತುಮಕೂರು : ಸೆಲ್ಫಿ ಫೋಟೋ ತೆಗೆದುಕೊಳ್ಳುವಾಗ ಯುವತಿಯೊಬ್ಬಳು ಕೆರೆ ಕೋಡಿ ನೀರಿನಲ್ಲಿ ಕಾಲು ಜಾರಿ ಬಿದ್ದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿಯನ್ನು ರಕ್ಷಣೆ ಮಾಡಲಾಗಿದೆ.
ಕೆರೆ ಕೋಡಿಯ ನೀರಿನಲ್ಲಿ ಸಾವನ್ನೇ ಗೆದ್ದು ಬಂದ ಯುವತಿಯನ್ನು ಹಂಸ ಎಂದು ಗುರುತಿಸಲಾಗಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ. ನಿನ್ನೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಹಂಸಾ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದರು. ಮಂದಾರಗಿರಿ ಬೆಟ್ಟದ ಸಮೀಪದಲ್ಲಿ ಮೈದಾಳ ಕೆರೆ ತುಂಬಿ ಕೋಡಿ ಬಿದ್ದಿತ್ತು.
ಮೈದಾಳ ಕೆರೆ ಕೋಡಿ ಬಿದ್ದಿರುವುದನ್ನು ನೋಡಲು ತೆರಳಿದ್ದ ಯುವತಿ, ನೀರು ಹರಿಯುವ ಸ್ಥಳದಲ್ಲಿ ನಿಂತು ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿದ್ದಾರೆ. ಕೆರೆ ಕೋಡಿಯಲ್ಲಿ ಕಾಲು ಜಾರಿ ಬಿದ್ದು ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದರು.
ಸೆಲ್ಫಿ ಆಪತ್ತಿನ ಈ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆ ಕೋಡಿ ನೀರನ್ನ ಬೇರೆಡೆಗೆ ಡೈವರ್ಟ್ ಮಾಡಿ ಕಾರ್ಯಾಚರಣೆ ಆರಂಭಿಸಿದ್ದರು. ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಹಂಸಾರನ್ನು ರಕ್ಷಣೆ ಮಾಡಲಾಗಿದೆ.
ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋದ ಯುವತಿ ಕೆರೆ ಕೋಡಿ ನೀರು ಹರಿಯುವಾಗ ಕಾಲು ಜಾರಿ ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಯುವತಿ ಸಾವನ್ನೇ ಗೆದ್ದು ಬಂದಿದ್ದಾರೆ.


























