ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2025 (IPL 2025) ರ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಆರು ರನ್ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿತ್ತು. ಆರ್ಸಿಬಿ ಚಾಂಪಿಯನ್ ಆಗುತ್ತಿದ್ದಂತೆ ದೇಶದಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
ಅದರಲ್ಲೂ ಆರ್ಸಿಬಿ ತವರಾದ ಕರ್ನಾಟಕದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಕೋಟ್ಯಾಂತರ ಅಭಿಮಾನಿಗಳು ರಸ್ತೆಗಿಳಿದು ಸಂಭ್ರಮಿಸಿದ್ದರು. ಇತ್ತ ಆರ್ಸಿಬಿ ಕೂಡ ಅಭಿಮಾನಿಗಳನ್ನು ಇನ್ನಷ್ಟು ರಂಜಿಸಲು ಮೆರವಣಿಗೆಯ ಕಾರ್ಯಕ್ರಮ ಕೂಡ ಹಮ್ಮಿಕೊಂಡಿತ್ತು. ಆದರೆ ಮೆರವಣಿಗೆ ನಡೆಯುವುದಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಸಾವನ್ನಪ್ಪಿದರು.
ಸರ್ಕಾರ ಕೂಡ ಹಲವರ ವಿರುದ್ಧ ಕ್ರಮ ಕೈಗೊಂಡಿದೆ. ಇದೆಲ್ಲದರ ನಡುವೆ #ArrestKohli ಹ್ಯಾಶ್ಟ್ಯಾಗ್ ಕಳೆದ 24 ಗಂಟೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೆಂಡಿಂಗ್ನಲ್ಲಿದೆ.
ಕೊಹ್ಲಿ ವಿರುದ್ಧವೂ ದೂರು ದಾಖಲು
ಇದು ಮಾತ್ರವಲ್ಲದೆ ಈ ದುರಂತಕ್ಕೆ ವಿರಾಟ್ ಕೊಹ್ಲಿಯೂ ಕಾರಣರೆಂದು ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಆರೋಪ ಹೊರಿಸುತ್ತಿದ್ದು,ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಈಗಾಗಲೇ ಆರ್ಸಿಬಿ ವಿರುದ್ದ ದಾಖಲಾಗಿರುವ ಎಫ್ಐಆರ್ ಜೊತೆಗೆ ಕೊಹ್ಲಿ ವಿರುದ್ಧದ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.