ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ, ಮಳೆಗೆ ದತ್ತಪೀಠದ ಮಾರ್ಗದ ಕವಿಕಲ್ ಗಂಡಿ ಬಳಿ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಪ್ರವಾಸಿ ಕಾರೊಂದು ಪಲ್ಟಿಯಾಗಿದೆ.
ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ಕೊಡಲು ಹೋದ ಕಾರು, ಕಲ್ಲಿನ ಮೇಲೆ ಹತ್ತಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆ ಮಧ್ಯೆ ಕಾರು ಪಲ್ಟಿಯಾದ ಪರಿಣಾಮ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಸ್ತೆ ಮಧ್ಯೆ ಕಾರು ಪಲ್ಟಿಯಾಗುತ್ತಿದ್ದಂತೆ ಅಲ್ಲದೇ ಇದ್ದ ಪ್ರವಾಸಿಗರು ಪಲ್ಟಿಯಾದ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಐವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಪಲ್ಟಿ ಹೊಡೆದ ಪಕ್ಕದಲ್ಲಿ ಪ್ರಪಾತ ಇರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.