ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ಅವುಗಳ ಮಾಹಿತಿ ನೀಡುತ್ತೇನೆಂದು ಪತ್ರ ಬರೆದುವಕೀಲರ ಮೂಲಕ ಪೊಲೀಸರನ್ನು ಸಂಪರ್ಕಿಸಿದ್ದ ವ್ಯಕ್ತಿ ಎಸ್.ಪಿ. ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಮುಸುಕುಧಾರಿಯಾಗಿ ಹಾಜರಾದ ನಂತರ ಜುಲೈ 16ರಂದು ಸಮಾಧಿ ಅಗೆಯುವ ಕಾರ್ಯ ನಡೆಯಲಿದೆ ಎಂಬ ವದಂತಿ ಹಬ್ಬಿತ್ತು.
ಈ ಬಗ್ಗೆ ಮಾಧ್ಯಮದವರು ಎಸ್ ಪಿಯವರಲ್ಲಿ ವಿಚಾರಿಸಿದಾಗ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ” ಧರ್ಮಸ್ಥಳ ಅಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿನ 16.07.2025ರಂದು ಮಧ್ಯಾಹ್ನ 3 ಗಂಟೆಗೆ ಸಮಾಧಿ ಅಗೆಯುವ ಯಾವುದಾದರು ಪ್ರಕ್ರಿಯೆ ನಡೆಯಲಿದೆಯೇ ಎಂಬುದಾಗಿ ಕೆಲವು ಮಾಧ್ಯಮ ಪ್ರತಿನಿಧಿಗಳು ವಿಚಾರಿಸಿರುತ್ತಾರೆ. ಪೊಲೀಸ್ ಇಲಾಖೆಯಿಂದ ಅಂತಹ ಅಧಿಕೃತ ಪ್ರಕ್ರಿಯೆಗಳು ಇರುವುದಿಲ್ಲ ಎಂಬುದಾಗಿ ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.