ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ತಳ್ಳುತ್ತಿರುವಂತೆ ತೋರಿಸುವ ಎಐ ನಿರ್ಮಿತ ವಿಡಿಯೋ ಪೋಸ್ಟ್ ಸಂಬಂಧ ‘ಕನ್ನಡ ಚಿತ್ರರಂಗ’ ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಲಭೆ ಪ್ರಚೋದನೆ, ನಕಲಿ ದಾಖಲೆ ಸೃಷ್ಟಿ ಮತ್ತು ಸಾರ್ವಜನಿಕ ಅಶಾಂತಿ ಉಂಟುಮಾಡಿದ ಆರೋಪದ ಹಿನ್ನಲೆ ವಕೀಲ ದೀಪು ಸಿ.ಆರ್. ಅವರು ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಸಭೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಳ್ಳುತ್ತಾರೆ. ಈ ವೇಳೆ ಮುಖ್ಯಮಂತ್ರಿಗಳು ಕುರ್ಚಿಯಿಂದ ಬೀಳುವ ದೃಶ್ಯ ಪೋಸ್ಟ್ ಮಾಡಲಾದ ವಿಡಿಯೋದಲ್ಲಿದೆ. ಇದರ ಜೊತೆಗೆ ಡಿಕೆಶಿ ಅವರು ಇಂತಹ ಕೆಲಸ ಮಾಡಬಾರದಿತ್ತು ಎಂಬ ಶೀರ್ಷಿಕೆಯನ್ನೂ ವಿಡಿಯೋದಲ್ಲಿ ಹಾಕಲಾಗಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿಸಿಎಂ ಮತ್ತು ಸಿಎಂ ಬೆಂಬಲಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ವಿಡಿಯೋ ಮೂಲಕ ಡಿ.ಕೆ. ಶಿವಕುಮಾರ್ ಅವರ ವ್ಯಕ್ತಿತ್ವವನ್ನು ಹಾನಿಗೊಳಿಸುವ ಉದ್ದೇಶವಿದೆ. ಸಮಾಜದಲ್ಲಿ ಸುಳ್ಳು ಮಾಹಿತಿ ಹಬ್ಬಿಸುವ ಮೂಲಕ ಮಾನ್ಯ ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಗೌರವವನ್ನು ಕುಗ್ಗಿಸುವುದಲ್ಲದೆ, ಸರ್ಕಾರವನ್ನು ಅವಮಾನಗೊಳಿಸಲೆಂದೇ ಸೃಷ್ಟಿಸಲಾಗಿದೆ.
ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಯಿದೆ ಎಂದು ದೂರುದಾರು ಆರೋಪಿಸಿದ್ದಾರೆ. ಈ ಹಿನ್ನಲೆ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita – BNS), 2023ರ ಸೆಕ್ಷನ್ 192, 336(4) ಮತ್ತು 353(2) ಅಡಿಯಲ್ಲಿ ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.



























