ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಡುಮದ್ದುಗಳು ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುರ್ವಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅವರು ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಾರ್ಚ್ 6ರಂದು ಸಂಜೆ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಸುಡುಮದ್ದು ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಸತೀಶ್ ಸುರ್ವಣ ಅವರು ಕಂದಾಯ ನಿರೀಕ್ಷಕ ರವಿ ಅವರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ವೇಳೆ ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿ ಇಟ್ಟಿರುವುದು ಪತ್ತೆಯಾಯಿತು. ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಸುಡುಮದ್ದುಗಳನ್ನು ದಾಸ್ತಾನು ಮಾಡಲಾಗಿದ್ದು, ಇದೇ ವೇಳೆ ಅವು ಸ್ಫೋಟಗೊಂಡಿರುವುದಾಗಿ ತಿಳಿದುಬಂದಿದೆ.
ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026 ರಂತೆ Explosives Act 1884ರ ಕಲಂ 9B ಹಾಗೂ BNS 288 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿತ ಅಬ್ದುಲ್ ಗಫೂರ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



























