ಮುಂಜಾನೆ ರಾಮಮೂರ್ತಿ ನಗರದ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಕಿರಣ್ (25) ಮೃತ ಯುವಕ. ಈತ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಕಿರಣ್ ವಿರುದ್ಧ ಸುಮಾರು 10ಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದ್ದವು. ಈ ಹಿಂದೆ ಹಲವು ಬಾರಿ ಕುಡಿದು ಗಲಾಟೆ ಮಾಡಿಕೊಂಡಿದ್ದ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಕೊಲೆಗೂ ಮುನ್ನ ಕಿರಣ್ ನಿನ್ನೆ ರಾತ್ರಿ ಕುಡಿದು ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ತಡರಾತ್ರಿಯವರೆಗೂ ಈ ಕಿತ್ತಾಟ ಮುಂದುವರಿದಿದ್ದು, ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ದುಷ್ಕರ್ಮಿಗಳು ಕಿರಣ್ನನ್ನು ಅಟ್ಟಾಡಿಸಿ, ತಲೆಗೆ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ರಸ್ತೆಯಲ್ಲೇ ಕಿರಣ್ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಘಟನೆ ನಡೆದ ತಕ್ಷಣ ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.



























