ಕಡಬ: ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್ ಎದುರಿನ ರಸ್ತೆಯಲ್ಲಿ ನಿಂತಿದ್ದ ದನವೊಂದನ್ನು ಅಪರಿಚಿತರು ಕಳವು ಮಾಡಿಕೊಂಡು ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.
ಮೇ 6ರಂದು ಬೆಳಗಿನ ಜಾವ ಸುಮಾರು 2.30ರಿಂದ 2.50ರ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ಇಬ್ಬರು ವ್ಯಕ್ತಿಗಳು ರಸ್ತೆ ಬದಿಯಲ್ಲಿದ್ದ ದನವನ್ನು ಹಿಡಿದು ಕಾರೊಂದರಲ್ಲಿ ಬಲವಂತವಾಗಿ ತುಂಬಿಸಿಕೊಂಡು ಹೋಗುತ್ತಿರುವುದು ದೃಶ್ಯಗಳಲ್ಲಿ ಕಾಣಿಸಿಕೊಂಡಿದೆ.
ಈ ಸಂಬಂಧ ಶೇಖರ ಎ. ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026ರಂತೆ ಪ್ರಕರಣ ದಾಖಲಾಗಿದೆ.
ಅಪರಿಚಿತ ಆರೋಪಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2), 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ-2020ರ ಕಲಂ 4, 5, 12, ಪ್ರಾಣಿ ಹಿಂಸಾತ್ಮಕ ತಡೆ ಕಾಯ್ದೆ-1960ರ ಕಲಂ 11(1)(ಡಿ) ಹಾಗೂ ಐಎಂವಿ ಕಾಯ್ದೆ-1988ರ ಕಲಂ 66, 192(A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

























