ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಪ್ರಕರಣವನ್ನು ಆಹಾರ ಇಲಾಖೆ ಹಾಗೂ ಪೊಲೀಸರು ಪತ್ತೆಹಚ್ಚಿದ್ದಾರೆ.
ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ ಅವರಿಗೆ ಮೇ 9ರಂದು ಬೆಳಿಗ್ಗೆ ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಲಾಯಿತು.
ದಾಳಿ ವೇಳೆ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕೆಎ-70-ಎ-2034 ಸಂಖ್ಯೆಯ ಅಟೋರಿಕ್ಷಾದಲ್ಲಿ 15 ಚೀಲ ಪಡಿತರ ಅಕ್ಕಿ ಪತ್ತೆಯಾಯಿತು. ಸ್ಥಳದಲ್ಲಿದ್ದ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಅವರನ್ನು ವಿಚಾರಿಸಿದಾಗ, ಅಕ್ಕಿಯನ್ನು ತಾನೇ ಅಕ್ರಮವಾಗಿ ದಾಸ್ತಾನು ಇಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಪರಿಶೀಲನೆ ವೇಳೆ 15 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹23,098 ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಅಕ್ಕಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.103/2026ರಂತೆ ಪ್ರಕರಣ ದಾಖಲಾಗಿದ್ದು, ಅವಶ್ಯಕ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7 ಹಾಗೂ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶ 2016ರ ಕಲಂ 18ರಡಿ ತನಿಖೆ ಮುಂದುವರಿದಿದೆ.



























