ಬಂಟ್ವಾಳ, ಮೇ 28: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ವಧೆ ನಡೆಸಲಾಗುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಮೇ 27ರಂದು ರಾತ್ರಿ ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಪೊಲೀಸ್ ತಂಡವು ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶದಲ್ಲಿ ದಾಳಿ ನಡೆಸಿತು.
ಪರಿಶೀಲನೆಯ ವೇಳೆ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಜಾನುವಾರದ ಮಾಂಸ ಕತ್ತರಿಸಲಾಗುತ್ತಿರುವುದು ಕಂಡುಬಂದಿತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಬಂಧಿತರನ್ನು ಸಜಿಪಮೂಡ ನಿವಾಸಿ ಮುಸ್ತಾಪ್ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದಿಕ್ (30) ಎಂದು ಗುರುತಿಸಲಾಗಿದೆ.
ಪೊಲೀಸರ ತನಿಖೆಯಲ್ಲಿ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿರುವುದು ದೃಢಪಟ್ಟಿದೆ. ಸ್ಥಳದಿಂದ ವಧೆ ಮಾಡಲಾದ ಒಂದು ಜಾನುವಾರದ ಮಾಂಸ, 6 ಜೀವಂತ ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ವಿವಿಧ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 68/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಹಾಗೂ 12ರ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.



























