ಹಾಸನ: ನಗರದ ಕೆ.ಎಸ್.ಆರ್.ಟಿ.ಸಿ. ಸಾರಿಗೆ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಪ್ಲಾಟ್ಫಾರಂಗೆ ನುಗ್ಗಿದ ಪರಿಣಾಮ, ಬಸ್ಗಾಗಿ ಕಾಯುತ್ತಿದ್ದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಚಿಕ್ಕಮಗಳೂರು ಮೂಲದ ಮಂಜುನಾಥ್ ಗಾಯಗೊಂಡ ವ್ಯಕ್ತಿ.
ತಕ್ಷಣವೇ ಅವರನ್ನು ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಜುನಾಥ್ ಅವರು ತಮ್ಮ ಸ್ವಂತ ಊರಾದ ಚಿಕ್ಕಮಗಳೂರಿಗೆ ತೆರಳಲು ಬಸ್ ನಿಲ್ದಾಣದ ಪ್ಲಾಟ್ಫಾರಂನಲ್ಲಿ ಕುಳಿತು ಕಾಯುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ KA-21 F-0151 ನೋಂದಣಿ ಸಂಖ್ಯೆಯ ಸಾರಿಗೆ ಬಸ್, ನಿಲ್ದಾಣಕ್ಕೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಅತಿ ವೇಗವಾಗಿ ಬಂದ ಬಸ್ ನೇರವಾಗಿ ಪ್ರಯಾಣಿಕರು ಕುಳಿತುಕೊಳ್ಳುವ ಪ್ಲಾಟ್ಫಾರಂ ಕಡೆಗೆ ನುಗ್ಗಿ, ಅಲ್ಲಿಯೇ ಇದ್ದ ಮಂಜುನಾಥ್ ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಕೆಲಕಾಲ ದಿಕ್ಕಾಪಾಲಾಗಿ ಓಡಿದ್ದು, ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನಾ ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.


























