ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ಸೂಚನೆಯ ಮೇರೆಗೆ ಎರಡೂ ತಂಡಗಳು ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ದಾಖಲಿಸಿವೆ.
ಸಂತ್ರಸ್ತೆ ಹಾಗೂ ಆಕೆಯ ತಾಯಿ ನಮಿತಾ, ಮತ್ತೊಂದೆಡೆ ಆರೋಪಿಯ ತಂದೆ ಪಿ.ಜಿ. ಜಗನ್ನಿವಾಸ ರಾವ್ ಮತ್ತು ಅವರ ಸಂಬಂಧಿಕರೊಬ್ಬರು ಮಧ್ಯಸ್ಥಿಕೆ ಕೇಂದ್ರಕ್ಕೆ ನೇರವಾಗಿ ಹಾಜರಾಗಿದ್ದರು. ಆರೋಪಿ ಕೃಷ್ಣ ಜೆ. ರಾವ್ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕ್ರಿಯೆಯಲ್ಲಿ ಭಾಗವಹಿಸಿ ತನ್ನ ಹೇಳಿಕೆ ನೀಡಿದ್ದಾನೆ.
ಹೈಕೋರ್ಟ್ ನೇಮಕಗೊಳಿಸಿದ್ದ ಮಧ್ಯಸ್ಥಿಕೆದಾರೆ ವಕೀಲೆ ಸುಶೀಲಾ ಅವರು ಎರಡೂ ಪಕ್ಷಗಳೊಂದಿಗೆ ಪ್ರತ್ಯೇಕವಾಗಿಯೂ ಹಾಗೂ ಜಂಟಿಯಾಗಿಯೂ ಮಾತುಕತೆ ನಡೆಸಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಧ್ಯಸ್ಥಿಕೆ ಪ್ರಕ್ರಿಯೆಯ ವರದಿಯನ್ನು ಶೀಘ್ರದಲ್ಲೇ ಹೈಕೋರ್ಟ್ಗೆ ಸಲ್ಲಿಸಲಾಗಲಿದ್ದು, ಅದರ ಆಧಾರದ ಮೇಲೆ ಪ್ರಕರಣದ ಮುಂದಿನ ಕಾನೂನು ಕ್ರಮದ ಕುರಿತು ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.
ಈ ಹಿಂದೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ. ರಾವ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆದ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಪ್ರಸ್ತಾಪ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಮಧ್ಯಸ್ಥಿಕೆ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ನಿರ್ದೇಶಿಸಿತ್ತು. ಅದರಂತೆ ಇದೀಗ ಮಧ್ಯಸ್ಥಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ಆದೇಶಕ್ಕಾಗಿ ಹೈಕೋರ್ಟ್ ವರದಿಯನ್ನು ಪರಿಶೀಲಿಸಲಿದೆ.



























