ಸುಳ್ಯ: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಜುಲೈ 6ರಂದು ಸುಳ್ಯದ ಶ್ರೀಮತಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಮುಖ್ಯ ಸಂಚಾಲಕ ಭರತ್ ಮುಂಡೋಡಿ ತಿಳಿಸಿದ್ದಾರೆ.
ಸುಳ್ಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಪಕ್ಷಾತೀತವಾಗಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲು ಈಗಾಗಲೇ ಅಭಿನಂದನಾ ಸಮಿತಿಯನ್ನು ರಚಿಸಲಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ವಹಿಸಲಿದ್ದು, ಉದ್ಘಾಟನೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೂರು ಧರ್ಮಗಳ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಸುಬ್ರಹ್ಮಣ್ಯದ ಸಂಪುಟ ನರಸಿಂಹಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಪೇರಡ್ಕ-ಗೂನಡ್ಕ ಜುಮಾ ಮಸೀದಿಯ ಖತೀಬ ಬಹು| ಅಹಮ್ಮದ್ ನಈಮ್ ಮುಅಬರಿ ಫೈಝಿ ಹಾಗೂ ಗುತ್ತಿಗಾರದ ಸೈಂಟ್ ಮೇರಿಸ್ ಚರ್ಚ್ನ ಫಾ| ಥೋಮಸ್ ಪಾರೆಕ್ಕಾಟಿಲ್ ಆಶೀರ್ವಚನ ನೀಡಲಿದ್ದಾರೆ ಎಂದರು.
ಅಂದು ಬೆಳಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ಸಭಾಭವನದವರೆಗೆ ಮೆರವಣಿಗೆ ನಡೆಯಲಿದ್ದು, ಅದಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಆಡಳಿತ ಮಂಡಳಿ ಅಧ್ಯಕ್ಷ ಡಾ| ರೇಣುಕಾಪ್ರಸಾದ್ ಕೆ.ವಿ. ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಚಿವರಿಗೆ ಮನವಿ ಸಲ್ಲಿಸಲು ಅನುಕೂಲವಾಗುವಂತೆ ಸಮಾರಂಭದ ಸ್ಥಳದಲ್ಲಿ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ಸುಳ್ಯದ ಅಭಿವೃದ್ಧಿಗೆ ಸಂಬಂಧಿಸಿದ ಸಾರ್ವಜನಿಕ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತರಲಾಗುವುದು ಎಂದು ಭರತ್ ಮುಂಡೋಡಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ, ಕರ್ನಾಟಕ ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಮೀಯತ್ತುಲ್ ಫಲಾಹ್ ಅಧ್ಯಕ್ಷ ಮೂಸಾ ಪೈಂಬೆಚ್ಚಾಲು, ಹರೀಶ್ ರೈ ಉಬರಡ್ಕ, ಡಾ| ಎನ್.ಎ. ಜ್ಞಾನೇಶ್ ಉಪಸ್ಥಿತರಿದ್ದರು.


























