ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರಂದು ನಡೆದ ಬಹುಕೋಟಿ ಮೌಲ್ಯದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಸಹಕರಿಸಿದ ಆರೋಪಿಗಳೂ ಸೇರಿ ಒಟ್ಟು ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಜೂನ್ 29ರಂದು ಬೆಳಗಿನ ಜಾವ ಸುಮಾರು 2.45ಕ್ಕೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ ಅವರ ವಾಹನವನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಮಂದಿ ಮುಸುಕುಧಾರಿಗಳು ಅಡ್ಡಗಟ್ಟಿದ್ದರು. ತಲವಾರು ತೋರಿಸಿ ಬೆದರಿಕೆ ಹಾಕಿದ ದುಷ್ಕರ್ಮಿಗಳು ದೂರುದಾರರ ಮೇಲೆ ಹಲ್ಲೆ ನಡೆಸಿ ಗಾಯಪಡಿಸಿದ್ದರು. ಬಳಿಕ ಪತ್ನಿ ಹಾಗೂ ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು, ಕಾರಿನಲ್ಲಿದ್ದ ಸುಮಾರು 180 ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ ಫೋನ್ಗಳು ಹಾಗೂ ಸ್ವಿಫ್ಟ್ ಡಿಸೈರ್ ಕಾರು ಸೇರಿದಂತೆ ಒಟ್ಟು ₹23.10 ಲಕ್ಷ ಮೌಲ್ಯದ ಆಸ್ತಿಯನ್ನು ದರೋಡೆ ಮಾಡಿ ಪರಾರಿಯಾಗಿದ್ದರು.
ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ವಿವಿಧ ಕಲಂಗಳು ಹಾಗೂ ಕೆಪಿಡಿಎಲ್ಪಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ಜೂನ್ 30ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಗುಡ್ಡ ಪ್ರದೇಶದಲ್ಲಿ ಆರೋಪಿಗಳು ಬಿಟ್ಟು ಹೋಗಿದ್ದ ದೂರುದಾರರ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಡಿಸೈರ್ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಮುಂದಿನ ಕಾರ್ಯಾಚರಣೆಯಲ್ಲಿ ಜುಲೈ 2ರಂದು ಪ್ರಕರಣದ ಪ್ರಮುಖ ಆರೋಪಿ ಕೇರಳದ ಕಣ್ಣೂರು ಜಿಲ್ಲೆಯ ನಿಮಿಲ್ ಆರ್.ಕೆ. (37) ಅವರನ್ನು ಕಣ್ಣೂರಿನ ಚಾಲದಲ್ಲಿರುವ ಅಸ್ಟರ್ ಮಿಮ್ಸ್ ಆಸ್ಪತ್ರೆ ಸಮೀಪ ಬಂಧಿಸಲಾಯಿತು. ಇದೇ ದಿನ ಕೃತ್ಯಕ್ಕೆ ಸಹಕರಿಸಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಕೊಡಗು ಜಿಲ್ಲೆಯ ಇರ್ಷಾದ್ (40) ಅವರನ್ನು ಪೊನ್ನಂಪೇಟೆಯಲ್ಲಿ ಹಾಗೂ ಪ್ರಮುಖ ಆರೋಪಿಗಳಿಗೆ ಕಾರು ಒದಗಿಸಿ ಆಶ್ರಯ ನೀಡಿದ್ದ ಮುಸ್ತಾಫ (49) ಅವರನ್ನು ಮಡಿಕೇರಿ ತಾಲೂಕಿನ ಮೂರ್ನಾಡು ಜಂಕ್ಷನ್ನಲ್ಲಿ ಬಂಧಿಸಲಾಯಿತು.
ಪ್ರಾಥಮಿಕ ತನಿಖೆಯಲ್ಲಿ ದರೋಡೆ ಕೃತ್ಯದಲ್ಲಿ ನೇರವಾಗಿ 14 ಮಂದಿ ಭಾಗಿಯಾಗಿದ್ದು, ಇಬ್ಬರು ಆರೋಪಿಗಳು ಆಶ್ರಯ ಹಾಗೂ ಇತರೆ ನೆರವು ನೀಡಿರುವುದು ಬೆಳಕಿಗೆ ಬಂದಿದೆ. ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಉಳಿದ 13 ಆರೋಪಿಗಳ ಬಂಧನ ಹಾಗೂ ದರೋಡೆಗೆ ಬಳಸಿದ ಉಳಿದ ಮೂರು ಕಾರುಗಳು, 180 ಗ್ರಾಂ ಚಿನ್ನಾಭರಣ ಮತ್ತು ಎರಡು ಮೊಬೈಲ್ ಫೋನ್ಗಳ ಪತ್ತೆ ಕಾರ್ಯ ಮುಂದುವರಿದಿದೆ.
ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಹಾಗೂ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್, ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಸಿಸಿಬಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

























