ತುಮಕೂರು: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ ಭುವನಾ ಚಿಕಿತ್ಸೆ ಫಲಿಸದೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ತುಮಕೂರು ತಾಲೂಕಿನ ಗೂಳೂರು ಬಳಿ ಬೈಕ್ನಲ್ಲಿ ಎಸ್ಐಆರ್ ಪ್ರಕ್ರಿಯೆಯ ವಿಎಒ ಸೂಪರ್ವೈಸರ್ ಆಗಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು.
ತುಮಕೂರಿನ ಹುಲ್ಲೇನಹಳ್ಳಿಯ ಗ್ರಾಮಲೆಕ್ಕಾಧಿಕಾರಿ ಟಿ. ಬೇಗೂರು ನಿವಾಸಿ ಭುವನಾ, ಇಂದು ಬೆಳಿಗ್ಗೆ ಎಸ್ಐಆರ್ ಕರ್ತವ್ಯಕ್ಕೆ ಸೂಚನೆ ಹಿನ್ನಲೆ ನಿಯುಕ್ತಿಗೊಂಡ ಸ್ಥಳಕ್ಕೆ ತೆರಳುತ್ತಿದ್ದರು. ಹೀಗಾಗಿ ತುಮಕೂರು ಬಸ್ ನಿಲ್ದಾಣದ ಬಳಿ ನಿಲ್ಲಿಸಿದ ತಮ್ಮ ಬೈಕ್ನಲ್ಲಿ ಗೂಳೂರಿನ ನಾಡಕಚೇರಿಗೆ ತೆರಳಿದ್ದಾರೆ. ಕುಣಿಗಲ್ ರಸ್ತೆಯ ಗೂಳೂರು ಬಳಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ.
ಹೆಲ್ಮಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಭುವನಾ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ಮರಣೋತ್ತರ ಪರಿಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು.
ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಬೇಗ ಬೇಗ ಎಸ್ಐಆರ್ ಮುಗಿಸುವಂತೆ ಒತ್ತಡ ಹಾಕುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ರು. ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಆಲಿಸುತ್ತಿದ್ರು.
ಇನ್ನು ಅಪಘಾತಕ್ಕೆ ಕಾರಣವಾದ ತಮಿಳುನಾಡು ಮೂಲದ ಲಾರಿ ಚಾಲಕ ಮುರುಗನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ತುಮಕೂರಿನಿಂದ ಕುಣಿಗಲ್ನತ್ತ ತೆರಳುತಿದ್ದ ಲಾರಿ, ಈ ವೇಳೆ ಗೂಳೂರು ಬಳಿ ಭುವನಾ ತೆರಳುತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಭುವನಾ ಸಂಬಂಧಿಕರು ತುಮಕೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಲಾರಿ ಚಾಲಕನನ್ನು ಬಂಧಿಸಿದ್ದಾರೆ.

























