ಸುಳ್ಯ: ತೂಗುಸೇತುವೆಗಳ ಸರದಾರ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಪರಿಣಾಮ ಅವರು ಕೊನೆಯುಸಿರೆಳೆದರು.
ಕಡಿಮೆ ವೆಚ್ಚದಲ್ಲಿ ನೂರಾರು ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಜನರಿಗೆ ಸಂಪರ್ಕ ಕಲ್ಪಿಸಿದ ಡಾ. ಗಿರೀಶ್ ಭಾರದ್ವಾಜ ಅವರು “ತೂಗುಸೇತುವೆಗಳ ಸರದಾರ” ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರು, ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅವರು ಅಗಲಿದ್ದಾರೆ.

























