ಪುತ್ತೂರು, ಜು. 8: ಕರ್ನಾಟಕ ಸರ್ಕಾರದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮೀಸಲು ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಶಾಸಕರ ಕಚೇರಿ ಮೂಲಕ ಹೆಸರು ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಕಾರ್ಯಾಗಾರ ನಡೆಯಲಿದೆ. ಜುಲೈ 11 ಮತ್ತು 12ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪ್ರಥಮ ಹಂತದ ಲಿಖಿತ ಪರೀಕ್ಷೆಯ ತರಬೇತಿ ನಡೆಯಲಿದೆ.
ಜುಲೈ 19ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆಗೆ ಸಂಬಂಧಿಸಿದ ತರಬೇತಿ ನಡೆಯಲಿದ್ದು, ಜುಲೈ 25 ಮತ್ತು 26ರಂದು ತೃತೀಯ ಹಂತದ ಲಿಖಿತ ಪರೀಕ್ಷೆಯ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಅನುಭವಿ ತರಬೇತುದಾರರಿಂದ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳಿಗೆ ಉಚಿತ ಉಪಾಹಾರ ಹಾಗೂ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಶಾಸಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಅವಕಾಶ ಲಭ್ಯವಿದ್ದು, ಶಾಸಕ ಅಶೋಕ್ ರೈ ನೇತೃತ್ವದ ರೈ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮವನ್ನು ಆಯೋಜಿಸಿದೆ.
ಹೆಚ್ಚಿನ ಮಾಹಿತಿಗಾಗಿ 99004 77528 ಹಾಗೂ 89047 07969 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
























