ಪುತ್ತೂರು, ಜು. 8: ಪುತ್ತೂರಿನಲ್ಲಿ ಯುವತಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹಾಗೂ ಬಳಿಕ ಯುವಕರು ನೀಡಿದ ಪ್ರತಿದೂರಿನ ಆಧಾರದಲ್ಲಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಪ್ರಕಟಣೆಯ ಪ್ರಕಾರ, ಪುತ್ತೂರಿನ ನಿವಾಸಿಯಾದ ಯುವತಿಯೊಬ್ಬರು ಜುಲೈ 8ರಂದು ಬೆಳಿಗ್ಗೆ ಸುಮಾರು 6.45ಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಪರಿಚಯದ ಹಾಗೂ ಕಾಲೇಜಿನ ಸಹಪಾಠಿಯಾಗಿದ್ದ ಸೊಹೈಲ್ ಎಂಬಾತ ಚಾಕು ಹಿಡಿದು ನಿಂತಿರುವುದನ್ನು ಕಂಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಸೊಹೈಲ್ ಹಾಗೂ ಆತನೊಂದಿಗೆ ಇದ್ದ ನಾಲ್ವರು ಸ್ನೇಹಿತರು ವಾಹನದಲ್ಲಿ ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಭಾವಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ, ವಿಚಾರಣೆಗೆ ಒಳಪಟ್ಟ ಯುವಕರು ತಾವು ಬೇಕರಿಯಿಂದ ಬ್ರೆಡ್ ಖರೀದಿಸಿದ ಬಳಿಕ ಅದಕ್ಕೆ ಚೀಸ್ ಹಚ್ಚಲು ಅಲ್ಲಿಂದ ಚಾಕು ಪಡೆದಿದ್ದು, ಬಳಿಕ ಅದನ್ನು ಹಿಂತಿರುಗಿಸಲು ತೆರಳುತ್ತಿದ್ದೆವು ಎಂದು ತಿಳಿಸಿದ್ದಾರೆ. ತಾವು ಯಾವುದೇ ಅಪರಾಧಿಕ ಕೃತ್ಯದಲ್ಲಿ ತೊಡಗಿಸಿಕೊಂಡಿಲ್ಲ ಹಾಗೂ ನಂತರ ಎಂದಿನಂತೆ ಜಿಮ್ಗೆ ತೆರಳಿದ್ದೇವೆ ಎಂದು ಪೊಲೀಸರಿಗೆ ವಿವರಿಸಿದ್ದಾರೆ.
ಇದೇ ವೇಳೆ, ಘಟನೆಯ ನೈಜ ಸಂಗತಿಗಳು ತಿಳಿದಿದ್ದರೂ ತಮ್ಮ ವಿರುದ್ಧ ದುರುದ್ದೇಶಪೂರ್ವಕವಾಗಿ ಮುರುಳಿಕೃಷ್ಣ ಹಸಂತಡ್ಕ ಮತ್ತು ಇತರರು ಯುವತಿಯ ಮೂಲಕ ಪ್ರಕರಣ ದಾಖಲಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ ಯುವಕರು ಪುತ್ತೂರು ನಗರ ಪೊಲೀಸ್ ಠಾಣೆಗೆ ಪ್ರತಿದೂರು ನೀಡಿದ್ದಾರೆ.
ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಘಟನೆಯ ಕುರಿತು ಸುಳ್ಳು ಅಥವಾ ಪರಿಶೀಲಿಸದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

























