ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡಿನ ಕೊಯಂಬತ್ತೂರು ನಿವಾಸಿ ಜಯಕುಮಾರ್ ವಿ. (55) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 8ರಂದು ಬಂಧಿಸಿ, ಆತನ ಬಳಿಯಿದ್ದ ಕಬ್ಬಿಣದ ಸಲಾಕೆ, ಸ್ಕ್ರೂಡ್ರೈವರ್, ಬ್ಯಾಗ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಮೇ ತಿಂಗಳಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 58/2026, 59/2026 ಹಾಗೂ 64/2026 ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 78/2026 ಹಾಗೂ 79/2026 ಪ್ರಕರಣಗಳ ತನಿಖೆ ವೇಳೆ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ದಕ್ಷಿಣ ಕನ್ನಡ ಜಿಲ್ಲೆಯ ಐದು ಪ್ರಕರಣಗಳ ಜೊತೆಗೆ ಮಂಗಳೂರು ಸುರತ್ಕಲ್ ಠಾಣೆಯ ಒಂದು ಪ್ರಕರಣ, ಕೇರಳದ ನಾಲ್ಕು ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣ ಹಾಗೂ ಬೆಂಗಳೂರಿನ ಒಂದು ಪ್ರಕರಣದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಒಟ್ಟು 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.
ಆರೋಪಿಯ ಬಂಧನ ಕಾರ್ಯಾಚರಣೆಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಾಗರಾಜ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಯಶಸ್ವಿಯಾಗಿ ನಡೆಸಿದೆ. ತಂಡದಲ್ಲಿ ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಿಡಿಆರ್ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.

























