ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಹೊಸಮನೆ ನಿವಾಸಿ ಸೋಮಶೇಖರ್ ಹೆಚ್. (27) ಅವರು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜುಲೈ 9ರಂದು ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂಜಾನೆ 1 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿಯಲು ಯತ್ನಿಸಿದ ವೇಳೆ ಬೈರಾಸು ತುಂಡಾಗಿದ್ದು, ಅವರು ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ನೆಲದಲ್ಲಿದ್ದ ಒಡೆದ ಗಾಜಿನ ಚೂರುಗಳಿಂದ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ ಕುಟುಂಬದವರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಸ್ಥಳೀಯರ ನೆರವಿನಿಂದ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಮೃತರ ತಂದೆ ಗಣಪಯ್ಯ ಅವರ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

























