ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್(ವಿಹೆಚ್ಪಿ) ಪ್ರಮುಖರು ಭೇಟಿ ನೀಡಿ, ಧೈರ್ಯ ತುಂಬಿ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ವಿಹೆಚ್ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ “ತಪ್ಪು ಗ್ರಹಿಕೆ” ಎಂದು ಬಿಂಬಿಸುವ ಮೂಲಕ ಆರೋಪಿಗಳನ್ನು ರಕ್ಷಿಸಲು ರಾಜಕೀಯ ಸಂಧಾನದ ಪ್ರಯತ್ನ ನಡೆಯುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಯುವತಿಗೆ ಸೂಕ್ತ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಅಲ್ಲದೆ, ಯುವತಿ ಹಾಗೂ ಆಕೆಯ ಕುಟುಂಬದ ವಿರುದ್ಧ ದಾಖಲಿಸಲಾಗಿದೆ ಎನ್ನಲಾದ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಯುವತಿಯ ಕುಟುಂಬಕ್ಕೆ ಸಂಘಟನೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಮುಖಂಡರು, ಘಟನೆಯ ಸಂಪೂರ್ಣ ಸತ್ಯಾಂಶವನ್ನು ಬಹಿರಂಗಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಉಪಸ್ಥಿತರಿದ್ದರು.
























