ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರ್ನಲ್ಲಿ ಜುಲೈ 22ರಂದು ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ಹಲವು ಮಕ್ಕಳು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಘಟನೆಯ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 35/2026 ಅನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194ರಡಿ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.
ತನಿಖೆಯ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಪಡೆದ ವರದಿಯಲ್ಲಿ, ಅಪಘಾತಕ್ಕೀಡಾದ ಶಾಲಾ ವಾಹನದ ವಿಮಾ (Insurance) ಹಾಗೂ ಅರ್ಹತಾ ಪ್ರಮಾಣಪತ್ರ (Fitness Certificate) ಘಟನೆ ನಡೆದ ಸಂದರ್ಭದಲ್ಲಿ ಮಾನ್ಯತೆಯಲ್ಲಿರಲಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಲ್ಲದೆ, ವಾಹನವು ಶ್ರೀರಾಮ ವಿದ್ಯಾ ಕೇಂದ್ರದ ಹೆಸರಿನಲ್ಲಿ ನೋಂದಾಯಿಸದೇ, ಬೇರೆ ಟ್ರಸ್ಟ್ನ ಮಾಲೀಕತ್ವದಲ್ಲಿದೆ ಎಂಬ ಮಾಹಿತಿಯೂ ಪತ್ತೆಯಾಗಿದೆ.
ಅಗತ್ಯ ದಾಖಲೆಗಳಿಲ್ಲದೇ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಚಲಾಯಿಸಲು ಅವಕಾಶ ನೀಡಿದ ಆರೋಪದಡಿ ಶ್ರೀರಾಮ ವಿದ್ಯಾ ಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 109/2026 ದಾಖಲಿಸಲಾಗಿದೆ.
ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 125 ಹಾಗೂ ಮೋಟಾರು ವಾಹನ ಕಾಯ್ದೆಯ (IMV Act) ಕಲಂ 196 ಮತ್ತು 192(1)ರಡಿ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.



























