ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ಬಾಲಕನು ತನ್ನ ನಾಲ್ವರು ಸಹಪಾಠಿಗಳೊಂದಿಗೆ ಆ.3ರಂದು ಬೆಳಗ್ಗೆ ಕಡಬದ ಕುಂಡಡ್ಕ ಪಾಲ್ಸ್ಗೆ ತೆರಳಿ ಆಟವಾಡುತ್ತಿದ್ದ ವೇಳೆ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ್ ಹಾಗೂ ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.
ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ ಹಲ್ಲೆ ನಡೆಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಬಾಲಕನ ಪರವಾಗಿ ಆ.11ರಂದು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




























