ನೆಕ್ಕಿಲಾಡಿ: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ತ್ಯಾಜ್ಯ ನಿರ್ವಹಣೆಯನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರದ ಪ್ರಮುಖರು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮೊದಲಿನಂತೆ ಪ್ರತಿದಿನ ಮನೆಮನೆಗೆ ಕಸ ಸಂಗ್ರಹಣೆ ನಡೆಸುವುದರ ಜೊತೆಗೆ ಡೈಪರ್ಗಳನ್ನೂ ಪ್ರತಿದಿನ ಸಂಗ್ರಹಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಶಾಂತಿನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಸಮರ್ಪಕ ನಿರ್ವಹಣೆ ನಡೆಯದ ಕಾರಣ ಗಬ್ಬು ವಾಸನೆ ಹರಡುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಘಟಕವನ್ನು ಕೂಡಲೇ ಸಮರ್ಪಕವಾಗಿ ನಿರ್ವಹಿಸಿ, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.
ತ್ಯಾಜ್ಯ ಸಂಗ್ರಹಣೆ ಮತ್ತು ಘಟಕದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ನಿವಾಸಿಗಳನ್ನು ಒಗ್ಗೂಡಿಸಿಕೊಂಡು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಸಂಘಟನಾ ಕಾರ್ಯದರ್ಶಿಗಳಾದ ಉಮೇಶ್ ಕೊಡಿಬೈಲ್ ಹಾಗೂ ಪ್ರಶಾಂತ್ ನೆಕ್ಕಿಲಾಡಿ, ನಿರ್ದೇಶಕರಾದ ರಾಜು ಶೆಟ್ಟಿ, ರೂಪೇಶ್ ನಾಯ್ಕ್ ಮತ್ತು ಮನೀಶ್ ಕುಲಾಲ್, ಸ್ಥಳೀಯರಾದ ರಾಜೇಶ್ ಶಾಂತಿನಗರ ಹಾಗೂ ಪ್ರಸಾದ್ ಉಪಸ್ಥಿತರಿದ್ದರು.




























