ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪದ್ಮಾವತಿ (29) ಗಂಡನಿಂದ ಕೊಲೆಯಾದ ಮಹಿಳೆ. ಸುಮಂತ್ ಜೈನ್ (32) ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪದ್ಮಾವತಿ ವೈಟ್ ಫೀಲ್ಡ್ ಸಮೀಪದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಸುಮಂತ್ ಸಿವಿಲ್ ಎಂಜಿನಿಯರ್ ಆಗಿದ್ದರು.
ಕಳೆದ ರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಜೋಡಿ ಮೂರು ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ನಿನ್ನೆ ದಂಪತಿ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸುಮಂತ್ ಪತ್ನಿ ಪದ್ಮಾವತಿ ಕಪಾಳಕ್ಕೆ ಹೊಡೆದಿದ್ದಾನೆ. ಪತ್ನಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ ಆತಂಕಗೊಂಡು ಮನೆಯ ಹಾಲ್ನಲ್ಲಿರುವ ಫ್ಯಾನ್ಗೆ ಸುಮಂತ್ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಪ್ಲ್ಯಾನ್ ಮಾಡಿಕೊಂಡಿದ್ದರು. ಈ ವಿಚಾರವನ್ನು ಸ್ನೇಹಿತರ ಜೊತೆ ಹಂಚಿಕೊಂಡಿದ್ದರು.




























