ಬಂಟ್ವಾಳ: ಮಂಗಳೂರಿನ ಕಣ್ಣೂರು ಪ್ರದೇಶದಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಯಿಂದ ₹8.52 ಲಕ್ಷ ನಗದು ಹಣವನ್ನು ತಲವಾರು ತೋರಿಸಿ ಬೆದರಿಸಿ ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಸುಲಿಗೆಗೊಳಗಾದವರನ್ನು ಸಂಸ್ಥೆಯ ಉದ್ಯೋಗಿ ಮಯ್ಯದಿ (40) ಎಂದು ಗುರುತಿಸಲಾಗಿದೆ. ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿ ತರಲು ಮಯ್ಯದಿ ಅವರು ಗುರುವಾರ ಬೈಕ್ನಲ್ಲಿ ತೆರಳಿದ್ದರು. ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿಕೊಂಡು ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರು ಕಡೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಘಟನೆ ನಡೆದಿದೆ.
ಈ ವೇಳೆ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರನ್ನು ತಡೆದು ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,52,000 ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.





























