ಬೆಳ್ಳಾರೆ:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿರುವ ಘಟನೆ ಸೆ. 6ರಂದು ಮಧ್ಯಾಹ್ನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ನಡೆದಿದೆ.
ಮುಕ್ಕೂರು ನಿವಾಸಿ ಗಣೇಶ (38) ಹಲ್ಲೆ ನಡೆಸಿದ ಆರೋಪಿ ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿ ವಿನಿತಾ (32) ಹಾಗೂ ಆಕೆಯ ತಾಯಿ ಕುಸುಮಾ (50) ಅವರಿಗೆ ಯಾವುದೋ ಹರಿತವಾದ ಸಾಧನದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆಯಿಂದ ಗಾಯಗೊಂಡ ವಿನಿತಾ ಹಾಗೂ ಕುಸುಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ಆರೋಪಿ ಗಣೇಶ ಇಲಿಪಾಷಾಣ ಸೇವಿಸಿದ್ದು, ಆತನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.





























