ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರಜಿಲ್ಲಾ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆಪ್ಟೆಂಬರ್ 1ರಂದು ಮಧ್ಯರಾತ್ರಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗವನ್ನು ಮುರಿದು ಒಳನುಗ್ಗಿದ್ದ ಕಳ್ಳರು, ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸೆಪ್ಟೆಂಬರ್ 6ರಂದು ಮುಲ್ಕಿ ಕಾರ್ನಾಡಿನಲ್ಲಿ ಜಾಹೀದ್ ಸಿನಾನ್ (36) ಮತ್ತು ಯಾಸೀನ್ (36) ಅವರನ್ನು ಬಂಧಿಸಿದರೆ, ಸೆಪ್ಟೆಂಬರ್ 7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ (26) ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ಅವರನ್ನು ಬಂಧಿಸಿದ್ದಾರೆ.
ನ್ಯಾಯಾಲಯದಿಂದ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ ಆರೋಪಿಗಳಿಂದ ಸುಮಾರು 4 ಕೆ.ಜಿ. 521 ಗ್ರಾಂ ಬೆಳ್ಳಿ ಹಾಗೂ 34.820 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಇವುಗಳ ಅಂದಾಜು ಮೌಲ್ಯ ₹11.20 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಕಾರನ್ನೂ ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯ ಸುಮಾರು ₹6 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿಗಳ ವಿಚಾರಣೆಯಿಂದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ನಡೆದ ಕಳವು ಪ್ರಕರಣಗಳೂ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿಯಾಗಿರುವ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶೀಕಾಂತ್ ಕೆ. ಅವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣೆಯ ಪಿಎಸ್ಐ ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳನ್ನು ಬಂಧಿಸಿ ಕಳವು ಮಾಡಲಾದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ತಂಡ ಯಶಸ್ವಿಯಾಗಿದೆ.




























