ಹುಬ್ಬಳ್ಳಿ: ಮುಸ್ಲಿಮರು ಪ್ರಾರ್ಥನಾ ಮಂದಿರಗಳಲ್ಲಿ ಧ್ವನಿ ವರ್ಧಕ ಬಳಸುವುದರ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 21 ವರ್ಷಗಳ ಹಿಂದೆಯೇ ಸುಪ್ರೀಂ ಕೋರ್ಟ್ ಶಬ್ಧ ಮಾಲಿನ್ಯ ನಿಲ್ಲಿಸುವಂತೆ ಆದೇಶ ಮಾಡಿದೆ. ಆದರೆ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ಆದೇಶ ಪಾಲನೆಯಾಗುತ್ತಿಲ್ಲ. ಹಾಗಾಗಿ ಇದರ ವಿರುದ್ಧ ಅಕ್ಟೋಬರ್ 7ರಿಂದ ಹೋರಾಟ ಪ್ರಾರಂಭಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಸೀದಿ ಮೇಲಿನ ಮೈಕ್ ನೀವು ತೆಗಿತಿರೋ..? ನಾವ್ ತೆಗಿಬೇಕೋ..?
“ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ಅಜಾನ್ ಮಾಡುವುದನ್ನು ಶೀಘ್ರವೇ ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದಲ್ಲಿ ಶ್ರೀರಾಮ ಸೇನೆಯಿಂದ ಧ್ವನಿವರ್ಧಕ ತೆರವು ಮಾಡಲಾಗುವುದು” ಎಂದು ತಿಳಿಸಿದರು.
“ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದರಿಂದ ನಿಶಬ್ಧ ವಲಯಗಳಲ್ಲಿ ಶಬ್ಧ ಮಾಲಿನ್ಯವಾಗುತ್ತಿದೆ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ಕೂಡಾ ಆದೇಶ ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.
“ಗೋಹತ್ಯೆ ನಿಷೇಧ ಕಾನೂನು ರೂಪಿಸಿದರೂ ಕೂಡಾ ಗೋಹತ್ಯೆ ಮಾತ್ರ ನಿಂತಿಲ್ಲ. ಗೋಹತ್ಯೆ ತಡೆಯುವ ಹಿಂದೂ ಕಾರ್ಯಕರ್ತರು ಮಾತ್ರವೇ ಕಾಣಿಸುತ್ತಿದ್ದಾರೆ. ಗೋಹತ್ಯೆಯನ್ನು ಏಕೆ ತಡೆಯುವುದಿಲ್ಲ? ಪೊಲೀಸರು ಏನು ಕತ್ತೆ ಕಾಯುತ್ತಿದ್ದಾರೆಯೇ?” ಎಂದು ಪ್ರಶ್ನಿಸಿದರು.
ಸರ್ಕಾರವೇ ನೇರ ಹೊಣೆ:
ಶಬ್ದ ಮಾಲಿನ್ಯ ತಡೆಗಟ್ಟುವಲ್ಲಿ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಹೀಗಾಗಿ ಜನಸಾಮಾನ್ಯರು ಈ ಕಿರಿಕಿರಿಯನ್ನ ಸಹಿಸಿಕೊಂಡು ಜೀವನ ಮಾಡುವ ಪರಿಸ್ಥಿತಿಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಗಳು ತಂದಿಟ್ಟಿವೆ. ಶೀಘ್ರವೇ ಈ ಶಬ್ಧ ಮಾಲಿನ್ಯ ತಡೆಯದಿದ್ದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.