ಮಂಗಳೂರು: ನಿರ್ಲಕ್ಷ್ಯತನದಿಂದ ಬೈಕ್ ಚಲಾಯಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣನಾದ ಸವಾರ ಗೌತಮ್ ಎಂಬಾತನಿಗೆ ಮಂಗಳೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆರು ತಿಂಗಳ ಸಾದಾ ಶಿಕ್ಷೆ ಮತ್ತು 6 ಸಾವಿರ ರೂ. ದಂಡವಿಧಿಸಿ ತೀರ್ಪು ನೀಡಿದೆ.
ಘಟನೆ ವಿವರ:
2017ರ ಆಗಸ್ಟ್ 30ರಂದು ಬೆಳಗ್ಗೆ ಮುಕ್ತ ಚೆಕ್ ಪೋಸ್ಟ್ ಬಳಿ ರಸ್ತೆ ದಾಟುತ್ತಿದ್ದ ವಾರಿಜಾ ಎಂಬವರಿಗೆ ಗೌತಮ್ ಎಂಬವರು ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದರೆನ್ನಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ವಾರಿಜಾರನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಈ ಕುರಿತು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಆಗಿನ ಪೊಲೀಸ್ ನಿರೀಕ್ಷಕ ಮಂಜುನಾಥ್ ಜೆಎಂಎಫ್ಸಿ ಎರಡನೇ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ ಮೂರು ತಿಂಗಳು 10 ದಿನ ಸಾದಾ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶೆ ಅಂಜಲಿ ಶರ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.