ತುಮಕೂರು: ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಹಾಗೂ ಕಾರ್ಯಕರ್ತ ಕಿರಣ್ ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ತುಮಕೂರಿನ ಗುಬ್ಬಿ ಗೇಟ್ ಬಳಿ ಘಟನೆ ಸಂಭವಿಸಿದ್ದು, ತೀವ್ರ ಗಾಯಗೊಂಡಿರುವ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಮಂಜು ಭಾರ್ಗವ್ ಹಾಗೂ ಕಿರಣ್ ಮೇಲೆ ಹಲ್ಲೆ ನಡೆಸಿದೆ.
ಮಂಜು ಭಾರ್ಗವ್ ಕಳೆದ ಮೂರು ತಿಂಗಳಿನಿಂದ ಅಕ್ರಮ ಗೋಸಾಗಾಟದ ವಿರುದ್ಧ ಹೋರಾಟ ನಡೆಸುತ್ತಿದ್ದರು. ಲಾರಿಗಳಲ್ಲಿ ಸಾಗಿಸುತ್ತಿದ್ದ ನೂರಾರು ಗೋವುಗಳನ್ನು ಕ್ಯಾತ್ಸಂದ್ರ ಪೊಲೀಸರ ಸಹಕಾರದಿಂದ ರಕ್ಷಿಸಿ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ಬೆದರಿಕೆಯನ್ನು ಹಾಕಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಾರಣಾಂತಿಕ ಹಲ್ಲೆ ನಡೆದಿದೆ. ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಂದ್ ಕರೆ: ಘಟನೆ ಬೆನ್ನಲ್ಲೇ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ.
ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಬುಧವಾರ ತುಮಕೂರಿನಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿವೆ.