ಬೆಂಗಳೂರು: ದೀಪಾವಳಿಯಂದು ಗೋಪೂಜೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಬಲಿಪಾಡ್ಯಮಿ ದಿನದಂದು ಅಂದರೆ ನ. 5 ರಂದು ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸುವ ಮೂಲಕ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸಬೇಕು. ಪ್ರತಿ ದೇಗುಲಗಳಲ್ಲಿ ಒಂದೊಂದು ಗೋವು ಪೂಜಿಸಬೇಕು. ಗೋವುಗಳಿಗೆ ಸ್ನಾನ ಮಾಡಿಸಿ, ಅಲಂಕರಿಸಿ ಪೂಜೆಗೆ ಸೂಚನೆ ನೀಡಲಾಗಿದೆ. ಗೋವುಗಳಿಗೆ ಅಕ್ಕಿ-ಬೆಲ್ಲ, ಬಾಳೆಹಣ್ಣು, ಸಿಹಿತಿನಿಸು ನೀಡಬೇಕು. ಸಂಜೆ 5.30 ರಿಂದ 6.30ರವರೆಗಿನ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ.