ಉಪ್ಪಿನಂಗಡಿ: ಡಿ.14 ರಂದು ಲಾಠಿ ಚಾರ್ಚ್ ಆಗಿದ್ದು, ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಪೇಟೆ ಶಾಂತ ಸ್ಥಿತಿಯಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಪ್ಪಿನಂಗಡಿಗೆ ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಪೊಲೀಸರನ್ನು ಕರೆಸಲಾಗಿದ್ದು, ಪೇಟೆಯಲ್ಲಿ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಉಡುಪಿ ಜಿಲ್ಲೆಯಿಂದಲೂ ಪೊಲೀಸ್ ಪಡೆಯನ್ನು ಕರೆಸಲಾಗಿದ್ದು, ಇವರೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮೀಸಲು ಪಡೆ, ವಿವಿಧ ಠಾಣಾ ಪೊಲೀಸ್ ಉಪನಿರೀಕ್ಷಕರು, ಸಿಬ್ಬಂದಿ ಉಪ್ಪಿನಂಗಡಿಯಲ್ಲಿದ್ದು, ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸ್ವಲ್ಪ ಮಟ್ಟಿನ ಜನರ ವಿರಳತೆ, ಕೆಲವು ಅಂಗಡಿಗಳು ಬಾಗಿಲು ಹಾಕಿದ್ದು, ಇನ್ನುಳಿದಂತೆ ಪೇಟೆ ಸಹಜ ಸ್ಥಿತಿಯಲ್ಲಿದ್ದು, ಎಂದಿನಂತೆ ವ್ಯವಹಾರ, ವ್ಯಾಪಾರಗಳು ನಡೆಯುತ್ತಿವೆ.
ಅಡಿಷನಲ್ ಎಸ್ಪಿಯವರು ನಿನ್ನೆಯಿಂದಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಳೆಗೇಟ್ನ ಸುಬ್ರಹ್ಮಣ್ಯ ಕ್ರಾಸ್ ಬಳಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಪೊಲೀಸ್ ಠಾಣೆಯ ಮುಂಭಾಗ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ನಿರತರಾಗಿದ್ದರು. ರಾತ್ರಿ ವಶಕ್ಕೆ ಪಡೆದವರಲ್ಲಿ ಓರ್ವ ಮುಖಂಡನನ್ನು ಬಿಡುಗಡೆಗೊಳಿಸಲಾಗಿತ್ತು. ಹಾಗೂ ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತಹಶೀಲ್ದಾರ್ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು.
ರಾತ್ರಿ ಆಕ್ರೋಶಿತ ಗುಂಪು ಮತ್ತಿಬ್ಬರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದಾಗ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದರು.