ಬಂಟ್ವಾಳ: ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ರವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ತಾಲೂಕು ಆಡಳಿತದ ಪರವಾಗಿ ಬಂಟ್ವಾಳ ಕಂದಾಯ ಇಲಾಖೆಯ ಸಿಬ್ಬಂದಿಗಳಿಂದ ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು ಬಂಟ್ವಾಳ ತಾಲೂಕಿನಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತ್ರವಲ್ಲದೆ ಮಾನ್ಯ ಶಾಸಕರು, ಎಲ್ಲಾ ಇಲಾಖೆಯವರು, ಮಾಧ್ಯಮ ಮಿತ್ರರು ಇವರೆಲ್ಲರ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು.
ಬಿ.ಸಿ.ರೋಡಿನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾ ಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಮದನ್ ಮೋಹನ್ ರವರು ತಹಶೀಲ್ದಾರ್ ರಶ್ಮಿ.ಎಸ್.ಆರ್. ರವರು ಬಂಟ್ವಾಳದಲ್ಲಿ ಜನಾನುರಾಗಿಯಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾದಂತೆ ಮುಂದಿನ ತಮ್ಮ ಇಲಾಖೆಯಲ್ಲೂ ಜಿಲ್ಲಾಮಟ್ಟದಲ್ಲಿ ಅವರ ಕರ್ತವ್ಯ ದಕ್ಷತೆಗೆ ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಉಮನಾಥ ರೈ ಮೇರಾವು, ಮೂಡಬಿದರೆಯ ಉಪತಹಶೀಲ್ದಾರ್ ರಾಮ ಕಾಟಿಪಳ್ಳ, ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದು, ಶುಭಹಾರೈಸಿದರು.