ಮಂಗಳೂರು: ಒಂದೆರಡು ದಿನಗಳಿಂದ ಚುರುಕಾಗಿರುವ ಮುಂಗಾರು ಮತ್ತಷ್ಟು ಬಿರುಸು ಪಡೆದುಕೊಂಡಿದೆ.
ಮಂಗಳೂರು, ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕಿನ ವಿವಿಧೆಡೆ ಮಳೆ ಉತ್ತಮವಾಗಿ ಸುರಿದಿದೆ.
ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಸಿದ್ದಾಪುರ, ಪಡುಬಿದ್ರಿ, ಹೆಬ್ರಿ, ಕಾಪು ಭಾಗದಲ್ಲಿ ಬಿಟ್ಟುಬಿಟ್ಟು ಮಳೆಯಾಗಿದೆ. ಗ್ರಾಮೀಣ ಭಾಗ ಕೃಷಿ ಭೂಮಿ, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.
ಬೆಳ್ತಂಗಡಿ ತಾಲೂಕಿನಾದ್ಯಂತ ಬುಧವಾರ ಕಂಡು ಬಂದಿದ್ದು ಭಾರೀ ಮಳೆಯಾಗಿದ್ದು, ಮುಖ್ಯ ರಸ್ತೆಯೇ ನೀರಿನಲ್ಲಿ ಮುಳುಗಿ ಹೋಗಿದೆ. ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಉಜಿರೆ ಜನಾರ್ದನ ಶಾಲೆಯ ಮುಂಭಾಗದಿಂದ ಸುಮಾರು 500 ಮೀ. ದೂರದವರೆಗೆ ನೀರು ರಸ್ತೆಯಲ್ಲಿ ಹರಿದ ಕಾರಣ ವಾಹನ ಸವಾರರು, ಪಾದಚಾರಿಗಳು ಸಂಕಷ್ಟ ಅನುಭವಿಸಿದರು. ರಸ್ತೆ ಪಕ್ಕದ ಅಂಗಡಿ, ಮನೆಗಳ ಮಂದಿಯೂ ಸಮಸ್ಯೆ ಎದುರಿಸಿದರು.
ಕರಾವಳಿಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದೆ. ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.