ಬಂಟ್ವಾಳ: ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸುನಿಲ್ ಕುಮಾರ್, ಘಟನೆ ನಡೆದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೋಲಿಸ್ ಇಲಾಖೆ ತಹಶೀಲ್ದಾರ್, ಪಿ.ಡಿ.ಒ , ಅಗ್ನಿಶಾಮಕದಳ, ಎನ್.ಡಿ.ಆರ್.ಎಫ್ ಹಾಗೂ ಕಾರ್ಯಕರ್ತರು, ಸ್ಥಳೀಯರು ಆಗಮಿಸಿ ಮಣ್ಣಿನೊಳಗೆ ಸಿಲುಕಿಕೊಂಡಿದ್ದ ನಾಲ್ವರನ್ನು ರಕ್ಷಣೆ ಮಾಡುವ ಪ್ರಯತ್ನ ಮಾಡಿದ್ದಾರೆ. ದುರದೃಷ್ಟವಶಾತ್ ನಾಲ್ವರು ಕಾರ್ಮಿಕರ ಪೈಕಿ ಓರ್ವನನ್ನು ಮಾತ್ರ ಜೀವಂತ ಉಳಿಸಿಕೊಳ್ಳಲು ಸಾಧ್ಯವಾಯಿತು.
ನಾಲ್ವರು ಕಾರ್ಮಿಕರು ಕೂಡ ಕೇರಳ ರಾಜ್ಯದವರು ಎಂದು ಪ್ರಾಥಮಿಕ ವರದಿಯ ಮಾಹಿತಿ. ಪೂರ್ಣ ವರದಿ ಬಂದ ನಂತರ ಸರಕಾರದ ಮಟ್ಟದಲ್ಲಿ ಸಾಧ್ಯವಿರುವ ಪರಿಹಾರವನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುವ ಮಳೆಗೆ ಪ್ರಕೃತಿಯಲ್ಲಿ ದೊಡ್ಡ ಮಟ್ಟದ ನಷ್ಟವನ್ನು ಉಂಟು ಮಾಡಿದೆ. ಬೇರೆ ಬೇರೆ ಕಡೆಗಳಲ್ಲಿ ಅನೇಕ ಪ್ರಾಕೃತಿಕ ವಿಕೋಪ ಉಂಟಾಗಿದ್ದು ಎಲ್ಲಾ ಪ್ರದೇಶಗಳಿಗೆ ಸಚಿವರು , ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಹಾರದ ಕಾರ್ಯವನ್ನು ಕೈಗೊಳ್ಳಲಿದ್ದೇವೆ. ಜೊತೆಗೆ ಜನರಿಗೆ ಧೈರ್ಯವನ್ನು ನೀಡುತ್ತವೆ. ಇಡೀ ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸನ್ನದ್ದ ಮಾಡುವ ಕೆಲಸ ಮಾಡುತ್ತೇವೆ ಎಂದರು.

ಇಂದು ತುರ್ತು ಸಭೆ:
ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಹಾಗೂ ಮುಂಜಾಗೃತ ಕ್ರಮವಾಗಿ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಮುಂದಿನ 48 ಗಂಟೆಯಲ್ಲಿ ಬರಬಹುದಾದ ಮಳೆಯ ಅಂದಾಜು ಮಾಡಿಕೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಹಶೀಲ್ದಾರ್ ಸ್ಮಿತಾರಾಮು, ಎಸ್.ಪಿ.ಹೃಷಿಕೇಶ್ ಸೋನಾವಣೆ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಪಿ.ಡಿ.ಒ. ವಿದ್ಯಾ ಶಿವಾನಂದ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮಕರಣೀಕ ಕುಮಾರ್ , ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯ ರುಗಳಾದ ಬಾಲಕೃಷ್ಣ ಪೂಜಾರಿ ವಿಕೇಶ್ ಮೋಹನ್ ದಾಸ್ ನೂಜಂತೋಡಿ ರೂಪಶ್ರೀ, ನಳಿನಿ ಪ್ರಸಾದ್, ಜಯಶ್ರೀ, ಗೋಪಾಲ ಕುಲಾಲ್ ಪೂವಪ್ಪ ಮೆಂಡನ್ ಹರೀಶ್ ಪೂಜಾರಿ ತಾಕೊಡೆ, ಬಿಜೆಪಿ ಪ್ರಮುಖರಾದ ಚಿದಾನಂದ ಶಶಿಧರ್ ಪ್ರವೀಣ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.






























